ನೋದ್ಧವೋSಣ್ವಪಿ ಮನ್ನ್ಯೂನೋ ಯದ್ಗುಣೈರ್ನಿರ್ಜಿತಃ[1] ಪ್ರಭುಃ ।
ಅತೋ ಮದ್ವತ್
ಪುನರ್ಲೋಕಂ ಗ್ರಾಹಯನ್ನಿಹ ತಿಷ್ಠತು ॥೩೨॥
ಶ್ರೀಕೃಷ್ಣ ಉದ್ಧವನ ಬಗ್ಗೆ ಯಾವ ನಿಲುವು
ಹೊಂದಿದ್ದ ಎನ್ನುವುದನ್ನು ಈ ಶ್ಲೋಕ ವಿವರಿಸುತ್ತದೆ. ಈ ಶ್ಲೋಕ ಮೇಲ್ನೋಟದಲ್ಲಿ ಒಂದು ಅರ್ಥವನ್ನು
ನೀಡಿದರೆ ಇದರ ಅಂತರಂಗದ ಅರ್ಥ ಭಿನ್ನವಾಗಿದೆ. ಮೇಲ್ನೋಟದಲ್ಲಿ ನೋಡಿದರೆ: “ಉದ್ಧವ ಜ್ಞಾನದಲ್ಲಿ
ನನಗಿಂತ ಯಾವ ನಿಟ್ಟಿನಲ್ಲೂ ಕಡಿಮೆ ಇಲ್ಲ; ಆತ ತನ್ನ ಗುಣಗಳಿಂದ ನನ್ನನ್ನು ಸೋಲಿಸಿದವನು. ಹೀಗಾಗಿ ಆತ ನಾನು ಅವತಾರ ಸಮಾಪ್ತಿ ಮಾಡಿದ ಮೇಲೆ ಲೋಕದ
ಜನರಿಗೆ ಜ್ಞಾನೋಪದೇಶ ಮಾಡುತ್ತಾ ಇಲ್ಲೇ ಇರಲಿ” ಎಂದು ಶ್ರೀಕೃಷ್ಣ ಸಂಕಲ್ಪ ಮಾಡಿದ. ಆದ್ದರಿಂದ
ಪ್ರಭಾಸ ಕ್ಷೇತ್ರದಲ್ಲಿ ಉಳಿದವರಂತೆ ಉದ್ಧವ ಹೊಡೆದಾಡಿಕೊಂಡು ಸಾಯಲಿಲ್ಲ ಎಂದು ಹೇಳಿದಂತಿದೆ.
ಆದರೆ ನಮಗೆ ತಿಳಿದಂತೆ: ಉದ್ಧವ ಶ್ರೀಕೃಷ್ಣನ ಪರಮ ಭಕ್ತ. ಹೀಗಾಗಿ ಶ್ರೀಕೃಷ್ಣ ಆತನಿಗೆ ಎರಡು
ಬಾರಿ ಉಪದೇಶ ಮಾಡಿ, ಆ ಜ್ಞಾನ ಸಂದೇಶವನ್ನು ಲೋಕಕ್ಕೆ ನೀಡುವಂತೆ ಹೇಳಿದ್ದ. ಹೀಗಿರುವಾಗ
ಜ್ಞಾನದಲ್ಲಿ ಸಮಾನ ಮತ್ತು ನನ್ನನ್ನು ಗೆದ್ದವನು
ಇತ್ಯಾದಿಯಾಗಿ ಇಲ್ಲಿ ಹೇಳಿರುವ ಮಾತಿನ ಅರ್ಥವೇನು ಎನ್ನುವುದನ್ನು ನಾವು ನೋಡಬೇಕು.
ಆಚಾರ್ಯ ಮಧ್ವರು ‘ಈ ಶ್ಲೋಕವನ್ನು ನಾವು ಬೇರೆಬೇರೆ ನಿಟ್ಟಿನಲ್ಲಿ ನೋಡಿ ಅರ್ಥ
ಮಾಡಿಕೊಳ್ಳಬೇಕು’ ಎನ್ನುವುದನ್ನು ತಮ್ಮ ತಾತ್ಪರ್ಯ ನಿರ್ಣಯದಲ್ಲಿ ವಿವರಿಸಿ ಹೇಳಿದ್ದಾರೆ.
ಬ್ರಹ್ಮತರ್ಕದಲ್ಲಿ ಹೇಳುವಂತೆ: ‘ಉತ್ತಮೈರಧಿಕತ್ವಂ
ವಾ ಸಾಮ್ಯಂ ವಾ ವಿಜಯೋSಪಿ ವಾ । ಉಚ್ಯತೇSಪಿತು ನೀಚಾನಾಂ ಮೋಹನಾರ್ಥೇ ವ್ಯಪೇಕ್ಷಯಾ[2] । ಮೂಢದೃಷ್ಟ್ಯನುಸಾರಾದ್ ವಾ ಕಿಞ್ಚಿತ್ಸಾಮ್ಯೇನ
ವಾ ಕ್ವಚಿತ್॥ ಅಂದರೆ: ಒಂದು
ಗ್ರಂಥದಲ್ಲಿ ಒಬ್ಬ ವ್ಯಕ್ತಿಗಿಂತ
ಕೆಳಗಿರುವವನನ್ನು ಆ ವ್ಯಕ್ತಿಗಿಂತ ಎತ್ತರದವನು ಎಂದು ಬಿಂಬಿಸಲು ನಾಲ್ಕು ಕಾರಣಗಳಿರುತ್ತವೆ.
(೧). ತಾಮಸರನ್ನು ಮೋಹಗೊಳಿಸುವುದಕ್ಕಾಗಿ ಹೇಳುವುದು, (೨). ಒಬ್ಬ ವ್ಯಕ್ತಿಯಲ್ಲಿರುವ ಒಳ್ಳೆಯ
ಗುಣವನ್ನು ಅತಿಶಯೋಕ್ತಿಯಿಂದ ಪ್ರಶಂಸಿಸುವುದಕ್ಕಾಗಿ ಹೇಳುವುದು, (೩). ದರ್ಶನ ಭಾಷೆಯಲ್ಲಿ ಹೇಳುವುದು.
ಅಂದರೆ: ಒಬ್ಬ ಸಾಮಾನ್ಯ ವ್ಯಕ್ತಿಗೆ ಹೇಗೆ ಕಂಡಿತೋ ಹಾಗೆ ಹೇಳುವುದು (ಒಬ್ಬ ಅಜ್ಞಾನಿಗೆ ಉದ್ಧವ
ಶ್ರೀಕೃಷ್ಣನಿಗಿಂತ ದೊಡ್ಡ ಜ್ಞಾನಿ ಎಂದು ಕಾಣಿಸಿರಬಹುದು) ಮತ್ತು (೪) ಸ್ವಲ್ಪ ಮಟ್ಟಿನ
ಸಾಮ್ಯವಿರುವಲ್ಲಿ ಸಾಮ್ಯವಿವಕ್ಷೆಯಿಂದ ಹೇಳುವುದು[ಉದ್ಧವ
ಜ್ಞಾನಿಗಳ ಸಾಲಿನಲ್ಲಿ ಅತ್ಯಂತ ಶ್ರೇಷ್ಠ ಸ್ಥಾನದಲ್ಲಿ ನಿಂತಿರುವುದರಿಂದ).
ಒಟ್ಟಿನಲ್ಲಿ ಹೇಳಬೇಕೆಂದರೆ: ಒಬ್ಬ ವ್ಯಕ್ತಿ ನಾಶವಾಗುವಾಗ ಆತನ ಜೊತೆಗೆ ಅವನಲ್ಲಿರುವ ಜ್ಞಾನ
ನಾಶವಾಗಬಾರದು ಎನ್ನುವುದು ಶ್ರೀಕೃಷ್ಣನ ಸಂಕಲ್ಪ. ಈ ತತ್ತ್ವವನ್ನು ಶ್ರೀಕೃಷ್ಣ ತನ್ನ ಅವತಾರ
ಸಮಾಪ್ತಿಯಲ್ಲೂ ಜಗತ್ತಿಗೆ ತೋರಿಸಿಕೊಟ್ಟ. ತಾನು
ಅವತಾರ ಸಮಾಪ್ತಿ ಮಾಡುವ ಮುನ್ನ ಜ್ಞಾನಿಯಾದ ಉದ್ಧವನಿಗೆ ಅಪೂರ್ವವಾದ ತತ್ತ್ವಜ್ಞಾನವನ್ನು
ಶ್ರೀಕೃಷ್ಣ ಭೋದಿಸಿದ. ಅದನ್ನು ಬದರಿ ಕ್ಷೇತ್ರದಲ್ಲಿರುವ ಸಮಸ್ತ ಋಷಿಗಳಿಗೆ ಉದ್ಧವನ ಮುಖೇನ ತಲುಪುವಂತೆ ಮಾಡಿದ.
ಇದರಿಂದಾಗಿ ಆ ಜ್ಞಾನ ಪರಂಪರೆ ಅಲ್ಲಿನ ಎಲ್ಲಾ
ಋಷಿಗಳ ಮುಖೇನ ಗಂಗಾ ನದಿಯಂತೆ ಈ ದೇಶದಲ್ಲಿ ಹರಿದು ಬಂತು.
॥ ಇತಿ ಶ್ರೀಮದ್ಭಾಗವತೇ ಮಹಾಪುರಾಣೇ ತೃತೀಯಸ್ಕಂಧೇ ಚತುರ್ಥೋSಧ್ಯಾಯಃ ॥
ಭಾಗವತ ಮಹಾಪುರಾಣದ ಮೂರನೇ ಸ್ಕಂಧದ ನಾಲ್ಕನೇ ಅಧ್ಯಾಯ ಮುಗಿಯಿತು
*********
No comments:
Post a Comment